Ad imageAd image

ಬೆಳೆಹಾನಿ: ರೈತರ ಖಾತೆಗೆ ಪರಿಹಾರ ಜಮೆ ಪ್ರಕ್ರಿಯೆಗೆ ಸಿಎಂ ಚಾಲನೆ

Kannada Bimba Team
2 Min Read

 

ಕನ್ನಡ ಬಿಂಬ, ಬೆಂಗಳೂರು

ಅತಿವೃಷ್ಟಿ, ಪ್ರವಾಹದಿಂದ ಬೆಳೆ ಕಳೆದುಕೊಂಡ ರೈತರಿಗೆ ನೆರವಾಗಲು ರಾಜ್ಯ ಸರಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ಘೋಷಿಸಲಾಗಿದ್ದ 1033.60 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು. ಇದರೊಂದಿಗೆ ಬೆಳೆ ಕಳೆದುಕೊಂಡ 14.24 ಲಕ್ಷ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಜಮೆಯಾಗುವ ಪ್ರಕ್ರಿಯೆಗೆ ಚಾಲನೆ ಸಿಕ್ಕಂತಾಗಿದೆ.

ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರ್‍ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.17ಸಾವಿರದಿಂದ ರೂ.25,500 ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.22,500ರಿಂದ ರೂ. 31 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಎಸ್‍ಡಿಆರ್‍ಎಫ್ ಮಾನದಂಡಗಳ ಪ್ರಕಾರ 14.24 ಲಕ್ಷ ರೈತರಿಗೆ ಇನ್ಪುಟ್ ಸಬ್ಸಿಡಿಯಾಗಿ ಈಗಾಗಲೇ ರೂ. 1218.03 ಕೋಟಿ ವಿತರಿಸಲಾಗಿದೆ. ಇದರ ಜೊತೆಗೆ ರಾಜ್ಯ ನಿಧಿಯಿಂದ ರೂ. 1033.60 ಕೋಟಿಯನ್ನು ಟಾಪ್ ಅಪ್ ರೂಪದಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿದೆ.  ಒಟ್ಟಾರೆಯಾಗಿ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿರುವ ಪಾವತಿಗಳನ್ನು ಒಳಗೊಂಡಂತೆ ರೂ.2251.63 ಕೋಟಿ ಯನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗಲಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.

ಮುಂಗಾರು ಅವಧಿಯಲ್ಲಿ ದಾಖಲೆಯ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಆದರೆ ಜೂನ್‍ನಿಂದ ಸೆಪ್ಟಂಬರ್ ಅವಧಿಯಲ್ಲಿ ಉಂಟಾದ ಅತಿವೃಷ್ಟಿಯಿಂದಾಗಿ 14.58 ಲಕ್ಷ ಹೆಕ್ಟೇರ್‍ಗಿಂತ ಹೆಚ್ಚಿನ ಪ್ರದೇಶದಲ್ಲಿನ ಬೆಳೆ ಹಾಳಾಗಿತ್ತು. ಇದರಿಂದ ರೂ.10,748 ಕೋಟಿ ಬೆಳೆ ಹಾನಿ ಅಂದಾಜಿಸಲಾಗಿದೆ. ಮುಖ್ಯವಾಗಿ ತೊಗರಿ ಬೆಳೆ 5.36 ಲಕ್ಷ ಹೆಕ್ಟೇರ್, ಹೆಸರು ಕಾಳು 2.63 ಲಕ್ಷ ಹೆಕ್ಟೇರ್, ಹತ್ತಿ 2.68 ಲಕ್ಷ ಹೆಕ್ಟೇರ್ ಮತ್ತು ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್‍ಗಳಷ್ಟು ಹಾಳಾಗಿದೆ.

ಒಂಭತ್ತು ಜಿಲ್ಲೆಗಳಲ್ಲಿ ಹೆಚ್ಚಿನ ಬೆಳೆ ಹಾನಿ ಉಂಟಾಗಿದೆ. ಮುಖ್ಯವಾಗಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬೆಳೆಗಳು ಕೊಯ್ಲಿನ ಹಂತಕ್ಕೆ ಬಂದ ಸಂದರ್ಭದಲ್ಲಿ ಭಾರೀ ಮಳೆಯಿಂದ ಹೆಚ್ಚಿನ ಹಾನಿ ಸಂಭವಿಸಿದೆ. ಕೃμÁ್ಣ ಮತ್ತು ಭೀಮಾ ಜಲಾನಯನ ಪ್ರದೇಶಗಳಲ್ಲಿ ನಿರಂತರ ಒಳ ಹರಿವು ಹೆಚ್ಚಳದಿಂದ ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟಾಗಿದೆ. ಬೆಳೆ ಹಾನಿಯನ್ನು ನಿಖರವಾಗಿ ಖಚಿತಪಡಿಸಲು ಜಂಟಿ ಸಮೀಕ್ಷೆ ನಡೆಸಿ ಹಾನಿಯನ್ನು ಅಂದಾಜಿಸಲಾಗಿದೆ. ಎಲ್ಲಾ ದತ್ತಾಂಶಗಳನ್ನು ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಭೂಮಿ ಮತ್ತು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಯೋಜಿಸಲಾಗಿದೆ.

ಬೆಳೆ ನಷ್ಟದ ಗ್ರಾಮವಾರು ಪಟ್ಟಿಯನ್ನು ಗ್ರಾಮ ಚಾವಡಿಗಳಲ್ಲಿ ಹಾಗೂ ಆನ್‍ಲೈನ್‍ನಲ್ಲಿ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಬಳಿಕ ನಷ್ಟ ಅನುಭವಿಸಿದ ರೈತರ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭಿಸಲಾಗಿದೆ.

ಪ್ರಧಾನಮಂತ್ರಿಯವರನ್ನು ನವೆಂಬರ್ 17ರಂದು ಭೇಟಿ ಮಾಡಿ, ಬೆಳೆ ಹಾನಿ ಇನ್ಪುಟ್ ಸಬ್ಸಿಡಿಗೆ ಪ್ರತಿಕ್ರಿಯೆ ಹಾಗೂ ಪರಿಹಾರ ಅಡಿಯಲ್ಲಿ ರೂ. 614.90 ಕೋಟಿ ಹಾಗೂ ಹಾನಿಗೊಳಗಾದ ಮೂಲಸೌಕರ್ಯಗಳನ್ನು ಸರಿಪಡಿಸಲು ರೂ. 1,521.67 ಕೋಟಿ ಪರಿಹಾರ ಒದಗಿಸಲು ಮನವಿ ಸಲ್ಲಿಸಲಾಗಿದೆ. ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರ ಅಂತರ ಸಚಿವಾಲಯದ ಕೇಂದ್ರ ತಂಡವನ್ನು ರಚಿಸಿದ್ದು, ಈ ತಂಡ ಶೀಘ್ರದಲ್ಲೇ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

Share This Article

You cannot copy content of this page